ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಮಕ್ಕಳಿರುವ ಮನೆಯಲ್ಲಿ ಉತ್ತಮ ಸಂಸ್ಕಾರವಿರುತ್ತದೆ. ಅವರಿಂದ ಪಾಶ್ಚಾತ್ಯೀಕರಣದ ಅನುಕರಣೆ ಬಹಳ ವಿರಳ ಎಂದು ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ದಾಮ್ಲೆ ಹೇಳಿದರು.

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದ. 12 ರಂದು ನಡೆದ ಮಕ್ಕಳ ವಾರ್ಷಿಕ ಸಾಂಸ್ಕೃತಿಕ ಹಬ್ಬ ‘ವಿವೇಕೋತ್ಸವ’ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಮಕ್ಕಳ ಪೋಷಕರು ಭಯ ಪಡಬೇಕಾಗಿಲ್ಲ. ಮಕ್ಕಳಿಗೆ ವಿಶ್ವಾಸದಿಂದ ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸ ನೀಡಬಹುದು. ಅವರಿಗೆ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಷ್ಟು ಒತ್ತಡವಿರುವುದಿಲ್ಲ. ಹೀಗಾಗಿ ಅವರು ಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು, ಕೃಷಿ ಸಂಬಂದಿಸಿದ ಚಟುವಟಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ನಿರಾಯಾಸವಾಗಿ ತೊಡಗಿಕೊಳ್ಳಲು ಸಾಧಯ್ವಿದೆ ಎಂದರು. ಮಕ್ಕಳು ಸೃಜನಾ ಶೀಲ ಚಿಂತಣೆ ಮೂಡಿ ಸಮಾಜದಲ್ಲಿ ಸ್ವತಂತ್ರವಾಗಿ ಜೀವನ ನಡೆಸಲು ಪೂರಕವಾದ ಎಲ್ಲ ತರಬೇತಿಗಳನ್ನು ಶಾಲೆಯಲ್ಲಿ ನೀಡಲಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್ ಮಾತನಾಡಿ, ಮಕ್ಕಳ ಪರಿಪೂರ್ಣ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹುಮುಖ್ಯ. ಮಕ್ಕಳಿಗೆ ಶಾಲಾ ಶಿಕ್ಷಣ ಮಾತ್ರ ಶಿಕ್ಷಣವಲ್ಲ. ಭವಿಷ್ಯದ ದೃಷ್ಟಿಯಿಂದ ಶಿಕ್ಷಣಕ್ಕೆ ಪೂರಕವಾಗಿ ಪೋಷಕರು ಮಕ್ಕಳನ್ನು ಬೆಳೆಸಬೇಕು ಎಂದರು.ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಮಿಷನ್ 95+ ಎಂಬ ವಿನೂತನ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಈ ಯೋಜನೆಯ ಮುಖಾಂತರ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಶಿಕ್ಷಣಕ್ಕೆ ಮಾತ್ರವಲ್ಲದೆ ಅದು ಅವರ ಮುಂದಿನ ಜೀವನಕ್ಕೂ ದಾರಿದೀಪವಾಗಬೇಕು ಎಂಬ ಮಹದಾಸೆಯಿಂದ ‘ದಾರಿದೀಪ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ. ಇದನ್ನು ಯಶಸ್ವಿಗೊಳಿಸುವಲ್ಲಿ ಪೋಷಕರ ಪಾತ್ರ ಬಹುಮುಖ್ಯ ಎಂದರು.
ಆಡಳಿತ ಮಂಡಳಿ ಅಧ್ಯಕ್ಷ ಡಾ|ಕೃಷ್ಣ ಭಟ್ ಕೊಂಕೋಡಿ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ವಸಂತ ಸುವರ್ಣ, ಆಂಗ್ಲ ಮಾಧ್ಯಮ ಶಾಲಾ ಮುಖ್ಯಗುರು ಸತೀಶ್ ಕುಮಾರ್ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನೀಶ ಬಡೆಕ್ಕಿಲ, ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಶ್ರೇಯಸ್, ಪ್ರೌಢಶಾಲಾ ವಿಭಾಗದ ನಾಯಕ ಅಣ್ಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಾರ್ಷಿಕ ಸಂಚಿಕೆ ‘ಸಾಹಿತ್ಯ ಮಿತ್ರ ಬಿಡುಗಡೆ’:-
ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಾರ್ಷಿಕ ಸಂಚಿಕೆ ‘ಸಾಹಿತ್ಯ ಮಿತ್ರ’ವನ್ನು ಅಧ್ಯಕ್ಷತೆ ವಹಿಸಿದ್ದ ಶಶಿಧರ್ ಜಿ.ಎಸ್. ಬಿಡುಗಡೆ ಮಾಡಿದರು.
ಸನ್ಮಾನ ಪ್ರತಿಭಾ ಪುರಸ್ಕಾರ:-
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಹಾಗೂ ಹರಿಣಾಕ್ಷಿಯವರನ್ನು ಶಾಲಾ ವಿದ್ಯಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು. ಶಾಲೆಯಲ್ಲಿ ಕ್ರೀಡೆ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಸುಮಾರು ೩೦ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಚಾಲಕ ರವೀಂದ್ರ ಪಿ. ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಮುಖ್ಯಗುರು ಆಶಾ ಬೆಳ್ಳಾರೆ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕರಾದ ರಾಜೇಶ್ ಪಿ.ಬಿ. ಮತ್ತು ಅಜಿತ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿ, ಉಮಾ ಮೋಹನ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿದ್ಯ ಕಾರ್ಯಕ್ರಮ ನಡೆಯಿತು.